ಬನ್ನಂಜೆ ಹೆದ್ದಾರಿಯಲ್ಲಿ ಅಪಾಯಕಾರಿ ಗುಂಡಿ: ತುರ್ತು ದುರಸ್ತಿಗೆ ಆಗ್ರಹ
Wednesday, August 05, 2026
ಉಡುಪಿ ನಗರದ ಬನ್ನಂಜೆ ನಾರಾಯಣ ಗುರು ಮಂದಿರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಕ್ರೀಟ್ ರಸ್ತೆ ಬಿರುಕುಬಿಟ್ಟು ದೊಡ್ಡ ಗುಂಡಿಯಾಗಿ ಮಾರ್ಪಟ್ಟಿದ್ದು, ವಾಹನ ಸವಾರರಿಗೆ ಅಪಾಯವನ್ನುಂಟು ಮಾಡಿದೆ.
ರಸ್ತೆಯ ಕಾಂಕ್ರೀಟ್ ಒಡೆದು ಒಳಭಾಗದಲ್ಲಿದ್ದ ಕಬ್ಬಿಣದ ಕಂಬಿಗಳು ಮೇಲಕ್ಕೆ ಎದ್ದು ಕಾಣಿಸುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಅಪಘಾತದ ಭೀತಿ ಎದುರಾಗಿದೆ. ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ಹೆದ್ದಾರಿಯಲ್ಲಿ ರಸ್ತೆ ಹದಗೆಟ್ಟಿರುವುದರಿಂದ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಪ್ರಕಾರ, ಈ ಅಪಾಯಕಾರಿ ಸ್ಥಳದಲ್ಲಿ ಈಗಾಗಲೇ ಕೆಲವು ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಯಾವುದೇ ಕ್ಷಣದಲ್ಲಿ ಮತ್ತಷ್ಟು ಗಂಭೀರ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಈ ಸ್ಥಳವು ಅಪಘಾತ ವಲಯವಾಗಿ ಮಾರ್ಪಟ್ಟಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಸಮಾಜಸೇವಕ ನಿತ್ಯಾನಂದ ಒಳಕಾಡು ಮಾತನಾಡಿ, ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತಿರುವ ಈ "ಮೃತ್ಯುಕೂಪ"ವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತವು ತುರ್ತು ಆದ್ಯತೆಯ ಮೇರೆಗೆ ದುರಸ್ತಿಪಡಿಸಬೇಕು. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.