ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ: ಸಮಿತಿ ರಚನೆಗೆ ಸಿಜೆ ಭರವಸೆ
Saturday, August 29, 2026
ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜ ಅವರ ನೇತೃತ್ವದ ನಿಯೋಗವು ಆ.28ರಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಬು ಭಕ್ರು ಅವರನ್ನು ಭೇಟಿ ಮಾಡಿ, ಸಂಚಾರಿ ಪೀಠವನ್ನು ಶೀಘ್ರ ಕಾರ್ಯಾರಂಭಗೊಳಿಸುವಂತೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ನಿಯೋಗದ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ವಿಬು ಭಕ್ರು ಅವರು, ಕರಾವಳಿ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವುದರಿಂದಾಗುವ ಸಾಧಕ-ಬಾಧಕಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ತಿಳಿಸಿದರು.
ಅಲ್ಲದೆ, ಹೈಕೋರ್ಟ್ ಸಂಚಾರಿ ಪೀಠದ ತಾತ್ಕಾಲಿಕ ಕಾರ್ಯಾರಂಭಕ್ಕೆ ಪ್ರಸ್ತಾಪಿಸಲಾಗಿರುವ ಮಂಗಳೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಸೆಪ್ಟೆಂಬರ್ ತಿಂಗಳಲ್ಲಿ ಖುದ್ದಾಗಿ ವೀಕ್ಷಿಸುವುದಾಗಿ ಅವರು ಭರವಸೆ ನೀಡಿದರು.
ಕರಾವಳಿ ಭಾಗದ ಜನರಿಗೆ ಹೈಕೋರ್ಟ್ ಸೇವೆಗಳನ್ನು ಸುಲಭವಾಗಿ ದೊರಕಿಸುವ ಉದ್ದೇಶದಿಂದ ಸಂಚಾರಿ ಪೀಠದ ಅಗತ್ಯತೆಯನ್ನು ನಿಯೋಗವು ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತಂದಿತು.
ನಿಯೋಗದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ ಶೇಣವ, ಮಾಜಿ ಅಧ್ಯಕ್ಷ ರಾಘವೇಂದ್ರ ರಾವ್, ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ವಕೀಲ ಎಂ.ಪಿ. ನೊರೋನ್ಹ ಉಪಸ್ಥಿತರಿದ್ದರು.