ಮಟ್ಟು ಬೀಚ್ ಬಳಿ ಕಡಲ್ಕೊರೆತ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳ ಪರಿಶೀಲನೆ
Monday, August 31, 2026
ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೀವ್ರ ಕಡಲ್ಕೊರೆತ ಉಂಟಾಗಿರುವ ಮಟ್ಟು ಬೀಚ್ ಪ್ರದೇಶಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸೋಮವಾರ ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಡಲ್ಕೊರೆತದಿಂದಾಗಿ ಕರಾವಳಿ ಪ್ರದೇಶಕ್ಕೆ ಉಂಟಾಗಿರುವ ಹಾನಿ ಹಾಗೂ ಸಂಭವನೀಯ ಅಪಾಯಗಳ ಕುರಿತು ಶಾಸಕರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಕಡಲ್ಕೊರೆತ ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ವಿಳಂಬ ಮಾಡದೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕಡಲ್ಕೊರೆತದಿಂದ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಶಾಶ್ವತ ಪರಿಹಾರ ಕಾಮಗಾರಿಗಳ ಕುರಿತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಕೋಟೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಯೋಗೀಶ್, ಮಾಜಿ ಸದಸ್ಯ ರಮೇಶ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕೋಟೆ ಶಕ್ತಿ ಕೇಂದ್ರದ ಹರ್ಷಿತ್, ಏಣಗುಡ್ಡೆ ಶಕ್ತಿ ಕೇಂದ್ರದ ಸಂತೋಷ್, ಸ್ಥಳೀಯರಾದ ಸತ್ಯನಾರಾಯಣ ರಾವ್ ಹಾಗೂ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಹಾಯಕ ಅಭಿಯಂತರ ಪ್ರಶಾಂತ್ ಉಪಸ್ಥಿತರಿದ್ದರು.
