SIR ಪರಿಷ್ಕರಣೆ: ರಮೇಶ್ ಕಾಂಚನ್ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ BLA-2ಗಳ ಸಭೆ
Sunday, August 23, 2026
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆಯು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಪ್ರಥಮ ಹಂತದ ಮಾಹಿತಿಯನ್ನು ಬಿ.ಎಲ್.ಎ-2ಗಳಿಂದ ಪಡೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎ.ಸಿ. ವಿನಯರಾಜ್ ಅವರು ಆಗಮಿಸಿದ್ದರು. ಈ ವೇಳೆ ಬಿ.ಎಲ್.ಎ-2ಗಳಿಂದ ಅಂಕಿ-ಅಂಶಗಳನ್ನು ಪಡೆದು, ಮುಂದಿನ ಹಂತದ SIR ಪ್ರಕ್ರಿಯೆಯಲ್ಲಿ ಬಿ.ಎಲ್.ಎ-2ಗಳ ಕರ್ತವ್ಯಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಅಲ್ಲದೆ, ಎಲ್ಲಾ ಬಿ.ಎಲ್.ಎ-2ಗಳು ಸಕ್ರಿಯವಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಯುವಕರನ್ನು ಸಂಘಟನೆಯ ಮೂಲಕ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಭಾರತ್ ಜೋಡೋ ಯುವಕರ ಸಂಘಟನೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ತಿಳಿಸಿದರು. ಎಲ್ಲಾ ಬೂತ್ಗಳ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು 16ರಿಂದ 35 ವರ್ಷ ವಯೋಮಿತಿಯ ಯುವಕ-ಯುವತಿಯರನ್ನು ಸಂಘಟನೆಯೊಂದಿಗೆ ನೋಂದಾಯಿಸಲು ಮುತುವರ್ಜಿ ವಹಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ಪಕ್ಷದ ನಾಯಕರಾದ ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಸೂರಜ್ ಕರ್ಕೇರ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಬಿ.ಎಲ್.ಎ-2ಗಳು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಸತೀಶ್ ಕೊಡವೂರು ವಂದಿಸಿದರು.

