ಭ್ರಷ್ಟಾಚಾರ ಪ್ರಕರಣ: ಎಸ್ಐಟಿ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಅಮಾನತು
ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಭ್ರಷ್ಟಾಚಾರ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ.
ವಿನೋದ್ ರೆಡ್ಡಿ ಅವರು ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಬಳಿಕ ಅವರನ್ನು ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದ ದಿನದಿಂದಲೇ ಅವರು ಬೆಳ್ತಂಗಡಿಯಲ್ಲಿ SIT ತಂಡದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದರು.
ಪೊಲೀಸ್ ವರ್ಗಾವಣೆ ಹಾಗೂ ಮಾಸಿಕ ವಸೂಲಿ ಸೇರಿದಂತೆ ವಿವಿಧ ವ್ಯವಹಾರಗಳ ಕುರಿತು ಮಾತುಕತೆ ನಡೆದಿದೆ ಎನ್ನಲಾದ ಆಡಿಯೋ ರೆಕಾರ್ಡಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಆಗಸ್ಟ್ 31ರಂದು ಪ್ರಾಥಮಿಕ ವಿಚಾರಣೆ ನಡೆಸಿದರು.
ಪ್ರಾಥಮಿಕ ವಿಚಾರಣೆಯ ಬಳಿಕ ಪಿಎಸ್ಐಗಳಾದ ಕಿರಣ್ ಪಾಟೀಲ್, ಕೃಷ್ಣ ಅರಿಕೆರೆ ಹಾಗೂ ವಿನೋದ್ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ. ಆಡಿಯೋದಲ್ಲಿ ಕೇಳಿಬಂದಿರುವ ಆರೋಪಗಳು ಹಾಗೂ ಪೊಲೀಸ್ ಸಿಬ್ಬಂದಿಯ ಪಾತ್ರದ ಕುರಿತು ಮುಂದಿನ ಹಂತದ ತನಿಖೆಯಲ್ಲಿ ಹೆಚ್ಚಿನ ಮಾಹಿತಿ ಹೊರಬರುವ ಸಾಧ್ಯತೆ ಇದೆ.