ಗುಜರಿ ವ್ಯಾಪಾರಿಯ ಸುಲಿಗೆ ಯತ್ನ: ಕಾಂಗ್ರೆಸ್ ಮುಖಂಡ ನಾಗೇಂದ್ರ ಪುತ್ರನ್ ಸೇರಿ ಮೂವರ ಬಂಧನ
ಸರ್ಕಾರಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಆರೋಪಿಸಿ ಗುಜರಿ ವ್ಯಾಪಾರಿಯೊಬ್ಬರಿಗೆ ಬೆದರಿಕೆ ಹಾಕಿ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ನಾಗೇಂದ್ರ ಪುತ್ರನ್ ಸಹಿತ ಮೂವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಆ.31ರಂದು ನಡೆದ ಘಟನೆಗೆ ಸಂಬಂಧಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಹಾಗೂ ತನಿಖಾಧಿಕಾರಿ ಮಹಾಂತೇಶ ಜಾಬಗೌಡ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಆರೋಪಿ ಸಚಿನ್ ಶ್ರೀಯಾನ್ (32) ಅವರನ್ನು ಸೆ.1ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಾಗೇಂದ್ರ ಪುತ್ರನ್ ಅಲಿಯಾಸ್ ನಾಗೇಂದ್ರ ಕೆ.ಕೆ. (37) ಹಾಗೂ ಪಿ. ಸುಮಂತ್ ಕುಂದರ್ (40) ಅವರನ್ನು ಸೆ.2ರಂದು ಮೈಸೂರು ಅರಮನೆ ಎದುರಿನ ವಸ್ತುಪ್ರದರ್ಶನ ಮೈದಾನದ ಬಳಿ ಬಂಧಿಸಿದ್ದಾರೆ. ಬಂಧಿತ ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಕೋಟ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವಿಜಯೇಂದ್ರ, ಶರತ್ ಹಾಗೂ ಶಿವರಾಜ್ ಸಹಕರಿಸಿದ್ದಾರೆ.