ಕೌಟುಂಬಿಕ ಸಮಸ್ಯೆಯಿಂದಾಗಿ ಶಾಲೆಯಿಂದ ಹೊರಗುಳಿದ ಇಬ್ಬರು ಮಕ್ಕಳ ರಕ್ಷಣೆ
Friday, September 11, 2026
ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದು ಮನೆಯಲ್ಲೇ ಇದ್ದ ಇಬ್ಬರು ಮಕ್ಕಳನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಹಾಗೂ ಮಕ್ಕಳ ರಕ್ಷಣಾ ತಂಡದ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದ್ದಾರೆ.
ಉದ್ಯಾವರದ ನೇಹನ್ (11) ಹಾಗೂ ನೌರೋಜ್ (8) ಎಂಬ ಮಕ್ಕಳು ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಶಾಲೆಗೆ ತೆರಳದೆ ಮನೆಯಲ್ಲೇ ಇರುವ ಕುರಿತು ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಪ್ರಜ್ವಲ್ ಹಾಗೂ ರಮ್ಯಾ, ಮಕ್ಕಳ ವಿಶೇಷ ಪೊಲೀಸ್ ಘಟಕದ ಸಿಬ್ಬಂದಿ ಮತ್ತು ಅಕ್ಕ ಪಡೆಯ ಸಿಬ್ಬಂದಿ ರಕ್ಷಿತಾ ಹಾಗೂ ವನಿತಾ ಅವರು ಸ್ಥಳಕ್ಕೆ ಭೇಟಿ ನೀಡಿ ಮಕ್ಕಳನ್ನು ರಕ್ಷಿಸಿದ್ದಾರೆ.
ಬಳಿಕ ಮಕ್ಕಳನ್ನು ಉಡುಪಿಯ ದೊಡ್ಡಣಗುಡ್ಡೆಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಇಬ್ಬರು ಮಕ್ಕಳಿಗೂ ದೊಡ್ಡಣಗುಡ್ಡೆಯ ಸರಕಾರಿ ಬಾಲಕರ ಬಾಲಮಂದಿರದಲ್ಲಿ ತಾತ್ಕಾಲಿಕ ಪುನರ್ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.
