-->
 ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು


ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಸೋಮವಾರ ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದ ಬಳಿ ನಡೆದಿದೆ.

ಗುಂಡೇಟಿನಿಂದ ಆರೋಪಿ ಉಮೇಶ್ ನಾಯ್ಕ್ (27) ಎಡಗಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ವೇಳೆ ಆರೋಪಿಯನ್ನು ವಶಕ್ಕೆ ಪಡೆದು ಕರೆತರುತ್ತಿದ್ದ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಅವರ ಎಡಭುಜಕ್ಕೂ ಗಾಯವಾಗಿದೆ.

ರಾಮೇನಕೊಪ್ಪದಲ್ಲಿ ಭಾನುವಾರ ಸಂಜೆ ರೌಡಿಶೀಟರ್ ಕುಳ್ಳಿ ಕಿರಣ್ (32) ಹತ್ಯೆಯಾಗಿದ್ದ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉಮೇಶ್ ನಾಯ್ಕ್ ಬಳಿಕ ತಲೆಮರೆಸಿಕೊಂಡಿದ್ದ. ಆರೋಪಿಯ ಪತ್ತೆಗಾಗಿ ತುಂಗಾನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಕಾರ್ಯಾಚರಣೆಯ ವೇಳೆ ಎನ್.ಆರ್.ಪುರ ಭಾಗದಲ್ಲಿ ಉಮೇಶ್ ನಾಯ್ಕ್‌ನನ್ನು ಪತ್ತೆಹಚ್ಚಿದ ಪೊಲೀಸರು ವಶಕ್ಕೆ ಪಡೆದು ಶಿವಮೊಗ್ಗದತ್ತ ಕರೆತರುತ್ತಿದ್ದರು. ಲಿಂಗಾಪುರ ಗ್ರಾಮದ ಸಮೀಪ ಬಂದಾಗ ಆರೋಪಿ ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್‌ಟೇಬಲ್ ತಮ್ಮಣ್ಣ ಅವರ ಎಡಭುಜಕ್ಕೆ ಚೈನ್‌ನಿಂದ ಹಲ್ಲೆ ನಡೆಸಿದ ಉಮೇಶ್ ನಾಯ್ಕ್, ಅಲ್ಲಿಂದ ಓಡಿ ಹೋಗಲು ಮುಂದಾಗಿದ್ದಾನೆ. ಪರಿಸ್ಥಿತಿಯನ್ನು ನಿಯಂತ್ರಿಸಲು ತುಂಗಾನಗರ ಠಾಣೆಯ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್ ಅವರು ಆರೋಪಿಗೆ ಮೊದಲು ಎಚ್ಚರಿಕೆ ನೀಡಿದ್ದಾರೆ.

ಆದರೂ ಎಚ್ಚರಿಕೆಯನ್ನು ಲೆಕ್ಕಿಸದೆ ಆರೋಪಿ ಪರಾರಿಯಾಗಲು ಮುಂದಾದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಗುರುರಾಜ್ ತಮ್ಮ ಸರ್ವಿಸ್ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾರೆ. ಗುಂಡು ಉಮೇಶ್ ನಾಯ್ಕ್ ಅವರ ಎಡಗಾಲಿಗೆ ತಗುಲಿದೆ. ಘಟನೆಯ ನಂತರ ಗಾಯಗೊಂಡ ಉಮೇಶ್ ನಾಯ್ಕ್ ಹಾಗೂ ಕಾನ್ಸ್‌ಟೇಬಲ್ ತಮ್ಮಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾಹಿತಿ ನೀಡಿದ್ದು, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ನಿಯಮಾನುಸಾರ ಎಚ್ಚರಿಕೆ ನೀಡಿದ ಬಳಿಕ ಗುಂಡು ಹಾರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕುಳ್ಳಿ ಕಿರಣ್ ಹತ್ಯೆ ಪ್ರಕರಣದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ, ಹತ್ಯೆಯ ಹಿಂದಿನ ಉದ್ದೇಶವೇನು ಹಾಗೂ ಪ್ರಕರಣದ ಸಂಪೂರ್ಣ ಹಿನ್ನೆಲೆ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಪ್ರಮುಖ ಆರೋಪಿ ಉಮೇಶ್ ನಾಯ್ಕ್ ಸದ್ಯ ಪೊಲೀಸರ ವಶದಲ್ಲಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Ads on article

Advertise in articles 1

advertising articles 2

Advertise under the article