ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಮಾನ್ಯತೆ ಘೋಷಿಸಲಿ: ಯೋಗೀಶ್ ಶೆಟ್ಟಿ ಜೆಪ್ಪು
ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಮಾನ್ಯತೆ ನೀಡುವ ಕುರಿತು ರಾಜ್ಯ ಸರ್ಕಾರ ಘೋಷಣೆ ಮಾಡಬೇಕು ಎಂದು ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಒತ್ತಾಯಿಸಿದರು.
ಉಡುಪಿಯ ತುಳುನಾಡು ರಕ್ಷಣಾ ವೇದಿಕೆಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ಭಾಷೆಗೆ ಸೂಕ್ತ ಮಾನ್ಯತೆ ನೀಡುವಂತೆ ವೇದಿಕೆಯ ವತಿಯಿಂದ ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಈ ಕುರಿತು ಪ್ರಧಾನಿ ಹಾಗೂ ಮುಖ್ಯಮಂತ್ರಿಯವರಿಗೂ ಮನವಿ ಸಲ್ಲಿಸಲಾಗಿದೆ ಎಂದರು.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಭರವಸೆ ನೀಡಿತ್ತು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ ಈ ಬೇಡಿಕೆ ಈಡೇರಿಲ್ಲ ಎಂದು ಅವರು ಹೇಳಿದರು.
ತುಳು ಭಾಷೆ ಯಕ್ಷಗಾನ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ವಿವಿಧ ಆಚರಣೆಗಳ ಮೂಲಕ ಶ್ರೀಮಂತ ಪರಂಪರೆಯನ್ನು ಹೊಂದಿದೆ. ಇಂತಹ ಪ್ರಾಚೀನ ಹಾಗೂ ಸಾಂಸ್ಕೃತಿಕವಾಗಿ ಮಹತ್ವದ ಭಾಷೆಗೆ ಸೂಕ್ತ ಸ್ಥಾನಮಾನ ದೊರೆಯದೇ ಇರುವುದು ವಿಷಾದನೀಯ ಎಂದರು.
ಈ ಹಿನ್ನೆಲೆಯಲ್ಲಿ ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಮಾನ್ಯತೆ ನೀಡುವ ಕುರಿತು ಸರ್ಕಾರ ಸ್ಪಷ್ಟ ಘೋಷಣೆ ಮಾಡಬೇಕು ಎಂದು ಯೋಗೀಶ್ ಶೆಟ್ಟಿ ಜೆಪ್ಪು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವುಂಜಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ನಾಗಲಕ್ಷ್ಮಿ, ನಗರ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಜಯ ಪೂಜಾರಿ ಲಕ್ಷ್ಮಿ ನಗರ , ಕಾಪು ತಾಲೂಕ ಅಧ್ಯಕ್ಷರಾದ ನಿತಿನ್ ಕುಮಾರ್ ಶೆಟ್ಟಿ, ಬ್ರಹ್ಮಾವರ ತಾಲೂಕ ಅಧ್ಯಕ್ಷರಾದ ಶರತ್ ರಾಜ್ ಆರೂರು, ಕಾಪು ತಾಲೂಕು ಮಹಿಳಾ ಅಧ್ಯಕ್ಷರಾದ ಅನುಸೂಯಾ ಶೆಟ್ಟಿ ಬೈರಂಪಳ್ಳಿ, ಅಧ್ಯಕ್ಷರಾದ ಕೃಷ್ಣಾನಂದ ನಾಯಕ್ , ಉಪಾಧ್ಯಕ್ಷರಾದ ಗುಣಾಕಾರ್ ಹಾಲಕ್ಕಿ, ಉಡುಪಿ ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ಕೃಷ್ಣ ಮಾರ್ಪಲ್ಲಿ, ಶಂಕರ್ , ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪವಿತ್ರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಜಿಲ್ಲಾ ಮಹಿಳಾ ಘಟಕ ವನಿತಾ ಆಚಾರ್ಯ, ಜಿಲ್ಲಾ ಮಹಿಳಾ ಜೊತೆ ಕಾರ್ಯದರ್ಶಿ ಮಂಜುಳ, ಸಾಂಸ್ಕೃತಿಕ ಕಾರ್ಯದರ್ಶಿ ಮುಖಂಡರಾದ ಉದಯ ಮತ್ತಿತರರು ಉಪಸ್ಥಿತರಿದ್ದರು