"ಶುದ್ಧೀಕರಣ ಮೈದಾನಕ್ಕಲ್ಲ ಬಿಜೆಪಿಗರ ಮನುವಾದಿ ಮನಸ್ಥಿತಿಗೆ ಮಾಡಲಿ": ಅಲೆವೂರು ಹರೀಶ್ ಕಿಣಿ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುಚಿಗೊಳಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ತಮ್ಮ ಮನುವಾದಿ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ. ಮೊದಲು ಅವರು ತಮ್ಮ ಮನಸ್ಸಿನಲ್ಲಿರುವ ಮನುವಾದಿ ಕೊಳಕನ್ನು ಶುಚಿಗೊಳಿಸಿಕೊಳ್ಳಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಟೀಕಿಸಿದರು.
ಅವರು ಉಡುಪಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಬಿಜೆಪಿ ಆಡಳಿತದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿದ್ದು, ಪ್ರತಿವರ್ಷ 50 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ ಎಂದು ಆರೋಪಿಸಿದ ಅವರು, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸುವ ಮೂಲಕ ಹಿರಿಯ ರಾಷ್ಟ್ರೀಯ ನಾಯಕನಿಗೆ ಅಪಮಾನ ಮಾಡಲಾಗಿದೆ. ಇದನ್ನು ಖಂಡಿಸಿ ರಾಷ್ಟ್ರದಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 12ರಂದು ಉಡುಪಿಯಲ್ಲೂ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ಅಜ್ಜರಕಾಡಿನ ಗಾಂಧಿ ಪ್ರತಿಮೆ ಎದುರು ಸತ್ಯಾಗ್ರಹ ನಡೆಯಲಿದೆ. ರಾಜ್ಯದ 41 ಜಿಲ್ಲೆಗಳಲ್ಲೂ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಅಲೆವೂರು ಹರೀಶ್ ಕಿಣಿ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ KPCC ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಚಾರ ಸಮಿತಿ ಪ್ರಮುಖರಾದ ಡಾ. ಸುಬ್ರಹ್ಮಣ್ಯ ಭಟ್, ಪ್ರಶಾಂತ್ ಪೂಜಾರಿ, ರಾಜೇಶ್ ಶೆಟ್ಟಿ, ದಿನಕರ್ ಶೆಟ್ಟಿ, ದಯಾನಂದ, ಚಂದ್ರಿಕಾ ಶೆಟ್ಟಿ ಮೊದಲಾದವ್ರು ಉಪಸ್ಥಿತರಿದ್ದರು,.